ಎಸ್ಸಿ/ಎಸ್ಟಿ ಬಜೆಟ್ ಕಾಯ್ದೆ ತಂದಿದ್ದು ನಮ್ಮ ಸರ್ಕಾರ: ಮೀಸಲಾತಿ ಪರ ಬದ್ಧತೆ ಪುನರುಚ್ಚರಿಸಿದ ಮುಖ್ಯಮಂತ್ರಿ
ಬೆಂಗಳೂರು: ವಿಧಾನ ಸೌಧದಲ್ಲಿ ಆಯೋಜಿಸಲಾಗಿದ್ದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ (SC/ST) ಪರ ತಮ್ಮ ಸರ್ಕಾರದ ಬದ್ಧತೆಯನ್ನು ಬಲವಾಗಿ ಪ್ರತಿಪಾದಿಸಿದರು.
ವಾಲ್ಮೀಕಿ ಸಮುದಾಯವನ್ನು ಪರಿಶಿಷ್ಟ ಪಂಗಡದ (ST) ಪಟ್ಟಿಗೆ ಸೇರಿಸುವಲ್ಲಿ ಮಾಜಿ ಪ್ರಧಾನಿ ದೇವೇಗೌಡರು ಮತ್ತು ಉಗ್ರಪ್ಪ ಅವರ ನಡುವಿನ ರಾಜಕೀಯ ಒಡನಾಟ ಪ್ರಮುಖ ಪಾತ್ರ ವಹಿಸಿತ್ತು ಎಂಬುದನ್ನು ಮುಖ್ಯಮಂತ್ರಿಗಳು ಈ ಸಂದರ್ಭದಲ್ಲಿ ಬಹಿರಂಗಪಡಿಸಿದರು.
SC/ST ಸಮುದಾಯಕ್ಕೆ ಬಜೆಟ್ ‘ಕಾಯ್ದೆ‘ ಬಲ
ತಮ್ಮ ಹಿಂದಿನ ಸರ್ಕಾರ ತಂದಿದ್ದ ಐತಿಹಾಸಿಕ ಕಾನೂನುಗಳನ್ನು ನೆನಪಿಸಿದ ಸಿದ್ದರಾಮಯ್ಯ, “ಎಸ್ಸಿ/ಎಸ್ಟಿ ಸಮುದಾಯಗಳಿಗೆ ಜನಸಂಖ್ಯೆಯ ಪ್ರಮಾಣದಷ್ಟೇ ಅಭಿವೃದ್ಧಿ ಬಜೆಟ್ ನಲ್ಲಿ ಹಣ ಮೀಸಲಿಡಲು ಕಾಯ್ದೆ ಮಾಡಿದ್ದು ನನ್ನದೇ ನೇತೃತ್ವದ ಸರ್ಕಾರ. ಅಲ್ಲದೆ, ಹೋಬಳಿಗೊಂದರಂತೆ ವಸತಿ ಶಾಲೆ, ಮೊರಾರ್ಜಿ ದೇಸಾಯಿ ಶಾಲೆಗಳನ್ನು ಮಾಡಿದ್ದು ಇದೇ ಸಿದ್ದರಾಮಯ್ಯ” ಎಂದು ಘೋಷಿಸಿದರು.
ಅಧಿಕಾರದಲ್ಲಿದ್ದಾಗ ಯಾರು ನಿಮ್ಮ ಪರವಾಗಿ ಇರುತ್ತಾರೋ, ಅವರ ಪರವಾಗಿ ವಾಲ್ಮೀಕಿ ಸಮುದಾಯ ನಿಲ್ಲಬೇಕು ಎಂದು ಸಮುದಾಯಕ್ಕೆ ಮುಖ್ಯಮಂತ್ರಿಗಳು ಕರೆ ನೀಡಿದರು.
ವಾಲ್ಮೀಕಿ ಸಮುದಾಯದ ಎಸ್ಟಿ ಸೇರ್ಪಡೆಯ ಇತಿಹಾಸ
ವಾಲ್ಮೀಕಿ ಸಮುದಾಯವನ್ನು ಎಸ್ಟಿ ಪಟ್ಟಿಗೆ ಸೇರಿಸುವಲ್ಲಿ ನಡೆದ ರಾಜಕೀಯ ಪ್ರಕ್ರಿಯೆಯನ್ನು ವಿವರಿಸಿದ ಅವರು, “ವಾಲ್ಮೀಕಿ ಮತ್ತು ಕುರುಬ ಸಮುದಾಯವನ್ನು ಎಸ್.ಟಿ ಗೆ ಸೇರಿಸಲು ನಾನು ಮತ್ತು ಉಗ್ರಪ್ಪ ಅವರು ಅಂದಿನ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆಯವರಿಗೆ ಮನವಿ ಮಾಡಿದ್ದೆವು. ಹೆಗಡೆಯವರು ಶಿಫಾರಸ್ಸು ಮಾಡಿದರೂ ಆಗ ಸೇರಿಸಲು ಆಗಲಿಲ್ಲ.”
“ಆದರೆ, ಉಗ್ರಪ್ಪ ಅವರು ಸುಮ್ಮನೆ ಕೂರಲಿಲ್ಲ. ದೇವೇಗೌಡರು ಪ್ರಧಾನಿಯಾಗಿದ್ದಾಗ, ಅವರ ಮತ್ತು ಚಂದ್ರಶೇಖರ್ ಅವರ ನಡುವಿನ ಒಡನಾಟ ಚೆನ್ನಾಗಿತ್ತು. ಉಗ್ರಪ್ಪ ಅವರು ದೇವೇಗೌಡರ ಮೂಲಕ ಅಂದಿನ ಪ್ರಧಾನಿ ಚಂದ್ರಶೇಖರ್ ಅವರನ್ನು ಒಪ್ಪಿಸಿ ವಾಲ್ಮೀಕಿ ಸಮುದಾಯವನ್ನು ಎಸ್.ಟಿ ಗೆ ಸೇರಿಸಿದರು” ಎಂದು ಮುಖ್ಯಮಂತ್ರಿಗಳು ಹೇಳಿದರು. ವಾಲ್ಮೀಕಿ, ಬೇಡ ಮತ್ತು ನಾಯಕ ಸಮುದಾಯಕ್ಕೆ ಮೀಸಲಾತಿ ದೊರಕಲು ಉಗ್ರಪ್ಪನವರೇ ಕಾರಣ ಎನ್ನುವುದನ್ನು ಮರೆಯಬಾರದು ಎಂದೂ ಅವರು ಒತ್ತಿ ಹೇಳಿದರು.
ಕುರುಬರ ಎಸ್.ಟಿ. ಮೀಸಲಾತಿ: ಬದ್ಧತೆ, ಆದರೆ ಸ್ಪಷ್ಟನೆಗೆ ಕಾಯುವಿಕೆ
ಕುರುಬ ಸಮುದಾಯವನ್ನು ಎಸ್ಟಿ ಪಟ್ಟಿಗೆ ಸೇರಿಸುವ ಹೋರಾಟದ ಕುರಿತು ಮಾತನಾಡಿದ ಅವರು, ಈ ಹೋರಾಟವನ್ನು ಬಿಜೆಪಿಯ ಈಶ್ವರಪ್ಪ ಅವರು ಮಾಡಿದ್ದು, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಶಿಫಾರಸ್ಸು ಮಾಡಿದ್ದಾರೆ ಎಂದರು. “ಕೇಂದ್ರ ಸರ್ಕಾರವು ಆ ಶಿಫಾರಸ್ಸಿನ ಬಗ್ಗೆ ಕೆಲವು ಸ್ಪಷ್ಟನೆಗಳನ್ನು ಕೇಳಿದೆ. ಅದಷ್ಟೇ ನಮ್ಮೆದುರಿಗಿದೆ.”
ಮೀಸಲಾತಿ ಹೆಚ್ಚಳದ ಬಗ್ಗೆ ತಮ್ಮ ನಿಲುವನ್ನು ಸ್ಪಷ್ಟಪಡಿಸಿದ ಸಿಎಂ, “ಕುರುಬರನ್ನು ಎಸ್.ಟಿ ಗೆ ಸೇರಿಸಿದರೆ ಎಸ್.ಟಿ ಮೀಸಲಾತಿ ಪ್ರಮಾಣ ಹೆಚ್ಚಾಗಬೇಕು ಎನ್ನುವುದಕ್ಕೆ ನನ್ನ ಬೆಂಬಲ, ಸಹಮತವೂ ಇದೆ.”
“ಯಾರೂ ಯಾರ ಅನ್ನದ ತಟ್ಟೆಗೆ ಕೈ ಹಾಕಬಾರದು. ಯಾರೂ ಯಾರ ಅವಕಾಶಗಳನ್ನೂ ಕಿತ್ತುಕೊಳ್ಳಬಾರದು ಎನ್ನುವುದು ನನ್ನ ಬದ್ಧತೆ” ಎಂದು ಮುಖ್ಯಮಂತ್ರಿಗಳು ತಮ್ಮ ಮೀಸಲಾತಿ ಪರ ನಿಲುವನ್ನು ಪುನರುಚ್ಚರಿಸಿದರು.
ಇದೇ ವೇಳೆ, ಶ್ರೇಷ್ಠ ರಾಮಾಯಣ ರಚಿಸಿದ ವಾಲ್ಮೀಕಿ ಸಮುದಾಯದ ಪ್ರತಿಯೊಬ್ಬರೂ ಶಿಕ್ಷಣವನ್ನು ಆದ್ಯತೆಯಾಗಿ ಪರಿಗಣಿಸಬೇಕು ಎಂದು ಕರೆ ನೀಡಿದರು. ವಾಲ್ಮೀಕಿ ಮತ್ತು ರಾಮಾಯಣವನ್ನು ಪಠ್ಯದಲ್ಲಿ ಸೇರಿಸಬೇಕು ಎನ್ನುವ ಉಗ್ರಪ್ಪ ಅವರ ಬೇಡಿಕೆ ಬಗ್ಗೆ ಸಕಾರಾತ್ಮಕವಾಗಿ ಪರಿಗಣಿಸಲಾಗುವುದು ಎಂದೂ ಸಿಎಂ ಭರವಸೆ ನೀಡಿದರು.

