ಹಾಸ್ಟೆಲ್ ಕಾರ್ಮಿಕರ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ರಾಜ್ಯಾದ್ಯಂತ ಪ್ರತಿಭಟನೆ
ಯಾದಗಿರಿ: ಪರಿಷ್ಕೃತ ಕನಿಷ್ಠ ವೇತನವನ್ನು ಕೂಡಲೇ ಜಾರಿಗೊಳಿಸಬೇಕು ಮತ್ತು ಜಿಲ್ಲಾ ಮಟ್ಟದ ಕಾರ್ಮಿಕರ ವಿವಿಧೋದ್ದೇಶ ಸಹಕಾರ ಸಂಘವನ್ನು ರಚಿಸಬೇಕು ಎಂದು ಒತ್ತಾಯಿಸಿ ರಾಜ್ಯದಾದ್ಯಂತ ಹಾಸ್ಟೆಲ್ ಕಾರ್ಮಿಕರು ಸೆಪ್ಟೆಂಬರ್ 24, 2025ರಂದು ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸಿದರು.
ಎಐಯುಟಿಯುಸಿ ಸಂಯೋಜಿತ ಕರ್ನಾಟಕ ರಾಜ್ಯ ಸಂಯುಕ್ತ ವಸತಿನಿಲಯ ಕಾರ್ಮಿಕರ ಸಂಘ (ರಿ) ನೇತೃತ್ವದಲ್ಲಿ ಈ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಮತ್ತು ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ (ಕ್ರೈಸ್) ವ್ಯಾಪ್ತಿಯಲ್ಲಿ ಸೇವೆ ಸಲ್ಲಿಸುತ್ತಿರುವ ಹೊರಗುತ್ತಿಗೆ ಕಾರ್ಮಿಕರು ತಮ್ಮ ಹಲವು ಬೇಡಿಕೆಗಳನ್ನು ಸರ್ಕಾರದ ಮುಂದಿಟ್ಟರು.
ಕಾರ್ಮಿಕರ ಪ್ರಕಾರ, ದಶಕಗಳಿಂದ ಸೇವೆ ಸಲ್ಲಿಸುತ್ತಿದ್ದರೂ ಅವರಿಗೆ ಕೆಲಸದ ಭದ್ರತೆ, ಕನಿಷ್ಠ ವೇತನ, ಪಿಎಫ್ ಮತ್ತು ರಜೆ ಸೇರಿದಂತೆ ಯಾವುದೇ ಕಾನೂನುಬದ್ಧ ಸೌಲಭ್ಯಗಳು ದೊರೆಯುತ್ತಿಲ್ಲ. ಹೊರಗುತ್ತಿಗೆದಾರರ ಮೂಲಕ ಕೆಲಸ ಮಾಡುವುದು ಹೊಸ ರೀತಿಯ ಜೀತ ಪದ್ಧತಿಯಾಗಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು. ಕಾರ್ಮಿಕ ನ್ಯಾಯಾಲಯಗಳು ಮತ್ತು ಉಚ್ಚ ನ್ಯಾಯಾಲಯಗಳ ಆದೇಶಗಳ ಹೊರತಾಗಿಯೂ, ಸರ್ಕಾರ ಅವರನ್ನು ಖಾಯಂಗೊಳಿಸಿಲ್ಲ ಎಂದು ಸಂಘದ ಮುಖಂಡರು ದೂರಿದರು.
ಪ್ರಮುಖ ಬೇಡಿಕೆಗಳು:
- ಹೊರಗುತ್ತಿಗೆ ಪದ್ಧತಿಯನ್ನು ರದ್ದುಗೊಳಿಸಿ, ಕಾರ್ಮಿಕರ ಸೇವೆಯನ್ನು ಖಾಯಂ ಮಾಡಬೇಕು. ಅಲ್ಲಿಯವರೆಗೆ ಇಲಾಖೆಗಳಿಂದಲೇ ನೇರವಾಗಿ ವೇತನ ಪಾವತಿಸಬೇಕು.
- ಎಲ್ಲಾ ಜಿಲ್ಲೆಗಳಲ್ಲಿ ವಿವಿಧೋದ್ದೇಶ ಕಾರ್ಮಿಕರ ಸಹಕಾರ ಸಂಘಗಳನ್ನು ಕೂಡಲೇ ರಚಿಸಬೇಕು.
- ಕನಿಷ್ಠ ವೇತನವನ್ನು ₹21,000ಕ್ಕೆ ಹೆಚ್ಚಿಸುವ ಸರ್ಕಾರದ ಅಧಿಸೂಚನೆಯನ್ನು ತಕ್ಷಣವೇ ಜಾರಿಗೆ ತಂದು, ಅದನ್ನು ಸರ್ಕಾರಿ ಆದೇಶವಾಗಿ ಹೊರಡಿಸಬೇಕು.
- ಜಿಲ್ಲಾ ಕೇಂದ್ರಗಳಲ್ಲಿ ಸುಸಜ್ಜಿತ ಇಎಸ್ಐ ಆಸ್ಪತ್ರೆಗಳನ್ನು ಪ್ರಾರಂಭಿಸಿ, ಇಎಸ್ಐ ಸೌಲಭ್ಯವನ್ನು ಸುಲಭವಾಗಿ ದೊರಕುವಂತೆ ಮಾಡಬೇಕು ಮತ್ತು ಇದರ ಮಿತಿಯನ್ನು ₹36,000ಕ್ಕೆ ಹೆಚ್ಚಿಸಬೇಕು.
- ಎಲ್ಲಾ ಗುತ್ತಿಗೆ ಕಾರ್ಮಿಕರಿಗೆ ಕನಿಷ್ಠ ವೇತನವನ್ನು ₹36,000ಕ್ಕೆ ನಿಗದಿಪಡಿಸಬೇಕು.
- 2017ರ ನಂತರ ಆರಂಭಗೊಂಡ ಎಲ್ಲಾ ವಸತಿ ಶಾಲೆ/ಕಾಲೇಜುಗಳಿಗೆ 11 ಜನ ಅಡುಗೆ ಸಿಬ್ಬಂದಿಯನ್ನು ನೇಮಕ ಮಾಡಬೇಕು.
ಈ ಸಂದರ್ಭದಲ್ಲಿ ಯಾದಗಿರಿ ಜಿಲ್ಲಾ ಸಮಿತಿಯ ಜಿಲ್ಲಾಧ್ಯಕ್ಷ ಶರಣಪ್ಪ ಜಿ. ತೆಳಿಗೇರಿಕರ್, ಕಾರ್ಯದರ್ಶಿ ರಾಮಲಿಂಗಪ್ಪ ಬಿ.ಎನ್, ಉಪಾಧ್ಯಕ್ಷ ತಾಜುದ್ದೀನ್ ಚೌಕಿ ಸೇರಿದಂತೆ ನೂರಾರು ಕಾರ್ಮಿಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಕಾರ್ಮಿಕರು ತಮ್ಮ ಬೇಡಿಕೆಗಳ ಮನವಿ ಪತ್ರವನ್ನು ಅಪರ ಜಿಲ್ಲಾಧಿಕಾರಿಗಳಿಗೆ ಸಲ್ಲಿಸಿದರು. ಮನವಿ ಪತ್ರವನ್ನು ತಕ್ಷಣವೇ ಮುಖ್ಯಮಂತ್ರಿಗಳು ಮತ್ತು ಸಂಬಂಧಿತ ಸಚಿವರಿಗೆ ರವಾನಿಸುವುದಾಗಿ ಅಪರ ಜಿಲ್ಲಾಧಿಕಾರಿಗಳು ಭರವಸೆ ನೀಡಿದರು.

