ಅಕ್ರಮ ಮದ್ಯದ ವಿರುದ್ಧ ಅಣಿಬಿಯಲ್ಲಿ ಜಾಗೃತಿ ಜಾಥಾ
ಸಂಯಮಕ್ಕೆ ಶರಣಪ್ಪ ಸಲಾದಪೂರ ಕರೆ
ಯಾದಗಿರಿ: ಗ್ರಾಮೀಣ ಪ್ರದೇಶಗಳಲ್ಲಿ ವ್ಯಾಪಕವಾಗಿ ಹರಡುತ್ತಿರುವ ಅಕ್ರಮ ಮದ್ಯ ಮಾರಾಟಕ್ಕೆ ಕಡಿವಾಣ ಹಾಕುವ ಉದ್ದೇಶದಿಂದ ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಹಾಗೂ ಯಾದಗಿರಿ ಜಿಲ್ಲಾ ಪಂಚಾಯತ್ ಸಂಯುಕ್ತ ಆಶ್ರಯದಲ್ಲಿ ಅಣಿಬಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಜಾಗೃತಿ ಜಾಥಾ ಹಾಗೂ ಅಭಿಯಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಅಧ್ಯಕ್ಷರಾದ ಶರಣಪ್ಪ ಸಲಾದಪೂರ, ಅಕ್ರಮ ಮದ್ಯವು ಕುಟುಂಬ ವ್ಯವಸ್ಥೆ, ಆರೋಗ್ಯ ಹಾಗೂ ಸಮಾಜದ ಮೇಲೆ ಗಂಭೀರ ದುಷ್ಪರಿಣಾಮ ಬೀರುತ್ತಿದೆ ಎಂದು ಹೇಳಿದರು. ಈ ಅನಿಷ್ಟವನ್ನು ನಿರ್ಮೂಲನೆ ಮಾಡಲು ಗ್ರಾಮಮಟ್ಟದಲ್ಲಿಯೇ ಜನಜಾಗೃತಿ ಅತ್ಯಂತ ಅಗತ್ಯವಿದೆ ಎಂದು ಅವರು ಅಭಿಪ್ರಾಯಪಟ್ಟರು.
ಯುವಕರು ಮತ್ತು ಮಹಿಳೆಯರು ಅಕ್ರಮ ಮದ್ಯದ ವಿರುದ್ಧ ನಡೆಯುವ ಹೋರಾಟದಲ್ಲಿ ಮುಂಚೂಣಿಯಲ್ಲಿ ನಿಲ್ಲಬೇಕು. ಸಂಯಮ ಮತ್ತು ಶಿಸ್ತಿನ ಮೂಲಕ ಮಾತ್ರ ಆರೋಗ್ಯಕರ ಸಮಾಜ ನಿರ್ಮಾಣ ಸಾಧ್ಯವೆಂದು ಶರಣಪ್ಪ ಸಲಾದಪೂರ ಕರೆ ನೀಡಿದರು.
ಈ ಸಂದರ್ಭದಲ್ಲಿ ಇಒ ಬಸವರಾಜ ಶರಬೈ, ರಾಜು ಅಣಿಬಿ, ಬಾಪುಗೌಡ ಅಣಿಬಿ, ಪಿಡಿಒ ರಮೇಶ್ ನಾಯಕ, ಆರೋಗ್ಯ ಇಲಾಖೆಯ ವೈದ್ಯರು, ಆಶಾ ಕಾರ್ಯಕರ್ತರು, ಅಂಗನವಾಡಿ ಸಿಬ್ಬಂದಿ, ಮಹಿಳೆಯರು, ಗ್ರಾಮದ ಪ್ರಮುಖರು ಹಾಗೂ ಗ್ರಾಮಸ್ಥರು ಭಾಗವಹಿಸಿ ಅಕ್ರಮ ಮದ್ಯದ ವಿರುದ್ಧ ಜಾಗೃತಿ ಮೂಡಿಸಿದರು.
ಅಣಿಬಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಸಂಯಮಿತ ಹಾಗೂ ಆರೋಗ್ಯಕರ ಸಮಾಜ ನಿರ್ಮಾಣದ ಸಂಕಲ್ಪದೊಂದಿಗೆ ಜಾಗೃತಿ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು.

